ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರು, ನಿವೃತ್ತ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷರಾದ ಹಿರಿಯ ಐಎಎಸ್ ಅಧಿಕಾರಿ ಡಾ.ಟಿ.ಶಾಮ ಭಟ್ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಿಕ ಸದಸ್ಯರಾದ ಎಸ್ ಕೆ ವಂಟಿಗೋಡಿ ಅವರಿಂದ ಆಯೋಗದ ಸಭೆಯು ಮಾರ್ಚ 26ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಯಕ್ಲಾಸಪುರದಲ್ಲಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಈ ವೇಳೆ ರಾಯಚೂರು ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ ವಿಲೇಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರಲಾಗಿದೆ. ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಗದಿತ ದಿನಾಂಕದಂದು ಸಾರ್ವಜನಿಕರಿಂದ ದೂರುಗಳು ಅಥವಾ ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರು ನಿಗದಿತ ದಿನಾಂಕದಂದು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಸಂಪರ್ಕಿಸಿ ದೂರುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಕಟಣೆ ತಿಳಿಸಿದೆ.

