ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೀದರ್‌ನಲ್ಲಿ ಏ.11, 12ರಂದು ೪೦ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೀದರ್‌ನ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ಅಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮೇಳನ ಉದ್ಘಾಟಿಸುವರು. ವಸ್ತು ಪ್ರದರ್ಶನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಚಾಲನೆ ನೀಡುವರು. ಬಸವಕಲ್ಯಾಣದ ಹಾರಕೂಡ ಹಿರೇಮಠದ ಶ್ರೀ ಡಾ.ಚನ್ನವೀರ ಶಿವಾಚಾರ್ಯರು, ಬಸವ ಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸುವರು. ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಪ್ರಧಾನ ಭಾಷಣ ಮಾಡುವರು. ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು. ಅದಕ್ಕೂ ಮುನ್ನ ಬಸವೇಶ್ವರ ವೃತ್ತದಿಂದ ವೇದಿಕೆವರೆಗೂ ಮೆರವಣಿಗೆ ನಡೆಸಲಾಗುವುದು ಎಂದು ವಿವರಿಸಿದರು.
ಹಿಂದೆ ಸಮ್ಮೇಳನವನ್ನು ಕೇವಲ ಒಂದು ದಿನ ಮಾತ್ರ ನಡೆಸಲಾಗುತ್ತಿತ್ತು. ಈಗ ಎರಡು ದಿನ ಮಾಡಲಾಗುತ್ತಿದೆ. ಸಮ್ಮೇಳನದಲ್ಲಿ ಪತ್ರಕರ್ತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸವಾಗುತ್ತಿದೆ. ಈ ಬಾರಿಯೂ ಸಮ್ಮೇಳನದಲ್ಲಿ ಅನೇಕ ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಮೊದಲ ದಿನ ಮಧ್ಯಾಹ್ನ ೨ ಗಂಟೆಗೆ ಗಾಂಧಿ- ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ ವಿಷಯದ ಕುರಿತು ಗೋಷ್ಠಿ ನಡೆಯಲಿದೆ. ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಉದ್ಘಾಟಿಸುವರು. ಸಂಜೆ ೪ ಗಂಟೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ಮಾಧ್ಯಮ ಕುರಿತು ೨ನೇ ಗೋಷ್ಠಿ ನಡೆಯಲಿದ್ದು, ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್ ಉದ್ಘಾಟಿಸುವರು. ಅದರ ಜತೆಗೆ ಸಂಜೆ ೫.೩೦ಕ್ಕೆ ಗಡಿ ಸಮಸ್ಯೆಗಳು ಕುರಿತು ಸಂವಾದ ಮತ್ತು ಸಂಜೆ ೫.೫೦ಕ್ಕೆ ಮಾಧ್ಯಮ ಮತ್ತು ಉದ್ಯಮ ಕುರಿತು ಉಪನ್ಯಾಸ ಆಯೋಜಿಸಲಾಗಿದೆ. ಸಂಜೆ ೭ ಗಂಟೆಗೆ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ ಎಂದು ವಿವರಿಸಿದರು.
ಇನ್ನೂ ಏ.೧೨ರ ಬೆಳಗ್ಗೆ ೯.೪೫ಕ್ಕೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಪ್ರತಿನಿಧಿಗಳ ಸಮಾವೇಶ ಮತ್ತು ಸರ್ವ ಸದಸ್ಯರ ಸಭೆ ಜರುಗಲಿದೆ. ಬೆಳಗ್ಗೆ ೧೧.೩೦ಕ್ಕೆ ಮಾಹಿತಿ ಹಕ್ಕು ಮತ್ತು ಪತ್ರಕರ್ತರು ಕುರಿತು ಮೂರನೇ ವಿಚಾರಗೋಷ್ಠಿ ಜರುಗಲಿದೆ. ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಉದ್ಘಾಟಿಸುವರು. ಮತ್ತೋರ್ವ ಆಯುಕ್ತರಾದ ಬದ್ರುದ್ದೀನ್ ವಿಷಯ ಪ್ರಸ್ತಾವನೆ ಮಾಡುವರು. ಆಯೋಗದ ಕಲಬುರಗಿ ವಿಭಾಗದ ಆಯುಕ್ತರಾದ ಬಿ. ವೆಂಕಟಸಿಂಗ್ ಅವರು ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ ೧೨ ಗಂಟೆಗೆ ಆರ್ಟಿಫಿಷಿಯಲ್ ಇಂಟಿಲಿಜೆನ್ಸ್, ಡಿಜಟಲೀಕರಣ ಪ್ರಭಾವ ಕುರಿತು ಗೋಷ್ಠಿ ನಡೆಯಲಿದೆ. ಕನ್ನಡಪ್ರಭ ಪ್ರಧಾನ ಸಂಪಾದಕರಾದ ರವಿ ಹೆಗಡೆ ಉದ್ಘಾಟಿಸುವರು. ಅಂದು ಮಧ್ಯಾಹ್ನ ೩ ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಸಮ್ಮೇಳನಕ್ಕೆ ಜಿಲ್ಲೆಯಿಂದ ಸುಮಾರು ೨೦೦ಕ್ಕೂ ಅಧಿಕ ಪತ್ರಕರ್ತರು ಆಗಮಿಸುವ ನಿರೀಕ್ಷೆ ಇದೆ. ವಿವಿಧ ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಅನೇಕರು ಪಾಲ್ಗೊಳ್ಳುವರು ಎಂದು ವಿವರಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಸ್ವಾಮಿ ಕುಕನೂರು, ರಾಜ್ಯ ಸಮಿತಿ ಸದಸ್ಯರಾದ ಬಸವರಾಜ ನಾಗಡದಿನ್ನಿ, ಅರವಿಂದ ಕುಲಕರ್ಣಿ, ಉಪಾಧ್ಯಕ್ಷ ಮಹಾನಂದ ನಾಯಕ, ಖಜಾಂಚಿ ಮಲ್ಲಿಕಾರ್ಜುನಯ್ಯ ಗೋಷ್ಠಿಯಲ್ಲಿದ್ದರು.

Leave a Reply

Your email address will not be published. Required fields are marked *