ರಾಯಚೂರು ಏಪ್ರಿಲ್ 13 (ಕರ್ನಾಟಕ ವಾರ್ತೆ): ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ 2026-27 ನೇ ಸಾಲಿಗಾಗಿ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರಾಯಚೂರು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಗೆ 65 ಗುರಿ ನಿಗಧಿಪಡಿಸಲಾಗಿದೆ. ಜಿಲ್ಲೆಯ ಪ್ರತಿಭಾವಂತ ಪರಿಶಿಷ್ಟ ವರ್ಗದ 5ನೇ ತರಗತಿಯಲ್ಲಿ ಶೇ.60 ಅಂಕ ಪಡೆದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಅರ್ಹತಾ ಪರೀಕ್ಷೆ ಮೂಲಕ ಆಯ್ಕೆ ಮಾಡಿ ನಿಯಮಗಳನ್ವಯ ದಾಖಲು ಮಾಡಿಕೊಳ್ಳಲಾಗುವುದು.
ಈ ಪ್ರತಿಷ್ಠಿತ ಶಾಲೆಗಳಲ್ಲಿ ಉಚಿತವಾಗಿ ವಸತಿ, ಭೋಜನಾ ವೆಚ್ಚ, ಶಾಲೆಯ ಕಡ್ಡಾಯ ಶುಲ್ಕ, ಸಮವಸ್ತ್ರ, ಪಠ್ಯ ಪುಸ್ತಕ ಹಾಗೂ ಇತರೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನಿಗಧಿಪಡಿಸಿದಂತೆ ಸೌಲಭ್ಯ ನೀಡಲಾಗುವುದು.
ವಿದ್ಯಾರ್ಥಿಗಳು ಸಂಬಂಧಪಟ್ಟ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳಿಗೆ ಸಲ್ಲಿಸಬೇಕು. ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರದ ಪ್ರತಿಗೆ ಪತ್ರಾಂಕಿತ ಅಧಿಕಾರಿ ಅವರಿಂದ ದೃಢೀಕರಿಸಿದ ಪ್ರಮಾಣ ಪತ್ರ ಲಗತ್ತಿಸಬೇಕು. ಹಾಗೂ 2 ಭಾವಚಿತ್ರಗಳನ್ನು (ಪಾಸ್ಪೋರ್ಟ್ ಸೈಜ್) ಲಗತ್ತಿಸುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯರ ಕುಟುಂಬದ ಆದಾಯ ಮಿತಿ 2ಲಕ್ಷ ರೂ.ಗಳ ಒಳಗಿರುವವರು ಮೇ. 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ರಾಯಚೂರು ಅಥವಾ ಆಯಾ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶಿವಮಾನಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
