ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ಅವರು ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್ ಅವರು “ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸ್ವೀಕರಿಸಿರುವುದು ಸಾಕಷ್ಟು ಹೆಮ್ಮೆ ಮತ್ತು ಸಂತಸದ ವಿಷಯವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿಯಿಂದ ಗೌರವದ ಜೊತೆಗೆ ಜವಾಬ್ದಾರಿ ಕೂಡ ಹೆಚ್ಚಾಗಿದೆ. ಭವಿಷ್ಯದಲ್ಲೂ ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯವನ್ನು, ವಿಶ್ವಾಸವನ್ನು ಎತ್ತಿ ಹಿಡಿಯುವ ದಾರಿಯಲ್ಲಿ ಸಾಗುತ್ತೇನೆ” ಎಂದು ತಿಳಿಸಿದರು.

“ಕಾಲೇಜು ದಿನಗಳಲ್ಲಿ ಡಾಕ್ಟರ್ ಆಗಬೇಕೆಂಬ ಕನಸಿತ್ತು. ಆದರೆ ವಿಜ್ಞಾನ ವಿಷಯದಲ್ಲಿ ಅಂಕಗಳು ಕಡಿಮೆ ಬರುತ್ತಿತ್ತು. ಹಾಗಾಗಿ ಇದು ಆಗದ ಕೆಲಸ ಎಂದು ಡಾಕ್ಟರ್ ಕನಸು ಬಿಟ್ಟು ಕಾನೂನು ವಿಷಯಕ್ಕೆ ಸೇರಿದೆ, ಆದರೆ ಮುಂದೆ ಆರೋಗ್ಯ ಸಚಿವನಾಗಿ ಕಾರ್ಯ ನಿರ್ವಹಿಸುವ ಅವಕಾಶ ಲಭಿಸಿತು. ಡಾಕ್ಟರ್ ಆಗದಿದ್ದರೂ ಇಂದು ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಡಾಕ್ಟರೇಟ್ ಲಭಿಸಿರುವುದು ಸಾಕಷ್ಟು ಖುಷಿಯ ವಿಷಯ. ಈ ಪ್ರೀತಿ, ಸಹಕಾರ ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇನೆ” ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳು ಡಾ. ಜಯಕರ ಎಸ್‌.ಎಂ, ಕುಲಸಚಿವ ಕೆ.ಟಿ.ಶಾಂತಲಾ, ಕುಲಸಚಿವ ಮೌಲ್ಯಮಾಪನ ಪ್ರೊ.ಸಿ.ಎಸ್.ಕರಿಗಾರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *