ವಿಧಾನ ಪರಿಷತ್ ಸದಸ್ಯರಾದ ಡಿ.ಟಿ. ಶ್ರೀನಿವಾಸ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮಸ್ಕಿ ತಾಲೂಕು ಯಾದವ ಸಮಾಜದ ಉಪಾಧ್ಯಕ್ಷ ಮಲ್ಲಿಕಾರ್ಜುನ ಹೆಚ್ ಯಾದವ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು,ಯಾದವ ಸಮಾಜದ ರಾಜ್ಯಾಧ್ಯಕ್ಷರು ಹಾಗೂ ಪ್ರವರ್ಗ-1 ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷರಾಗಿರುವ ಡಿ.ಟಿ. ಶ್ರೀನಿವಾಸ್ ಅವರು ಕಳೆದ ಎರಡು ದಶಕಗಳಿಂದ ಹಿಂದುಳಿದ ವರ್ಗಗಳ ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 40 ಲಕ್ಷ ಯಾದವ ಸಮುದಾಯದ ಜನರು ಹಾಗೂ 2.5 ಕೋಟಿ ಪ್ರವರ್ಗ-1 ಸಮುದಾಯದ ಜನರಿಗೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ಸಿಗದಿರುವುದು ಬೇಸರದ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಡಿ.ಟಿ. ಶ್ರೀನಿವಾಸ್ ಅವರ ಅನುಭವ, ಸಾಮಾಜಿಕ ಕಳಕಳಿ ಹಾಗೂ ಹೋರಾಟದ ಮನೋಭಾವವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಿದರೆ ಅದು ಕೇವಲ ಒಬ್ಬ ವ್ಯಕ್ತಿಗೆ ಸಿಗುವ ಗೌರವವಲ್ಲ, ಇಡೀ ಹಿಂದುಳಿದ ವರ್ಗಗಳಿಗೆ ದೊರೆಯುವ ನ್ಯಾಯ ಮತ್ತು ಗೌರವವಾಗಲಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಕೂಡಲೇ ಈ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಂಡು ಡಿ.ಟಿ. ಶ್ರೀನಿವಾಸ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಮಲ್ಲಿಕಾರ್ಜುನ ಹೆಚ್ ಯಾದವ್ ಆಗ್ರಹಿಸಿದ್ದಾರೆ.

