ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಆದ್ಯತೆ ನೀಡುತ್ತೇನೆ- ಆರ್. ಬಸನಗೌಡ ಮಸ್ಕಿ: ಗ್ರಾಮೀಣ ಭಾಗದಲ್ಲಿರುವ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಜತೆಗೆ ಗ್ರಾಮೀಣ ಭಾಗದ ಸರ್ವಾಂಗಿಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದು ಖಾದಿ ಮತ್ತು ಗ್ರಾಮದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ ತುರವಿಹಾಳ ಹೇಳಿದರು.
ಮಸ್ಕಿ ತಾಲ್ಲೂಕಿನ ಬೆಳ್ಳಿಗಾನೂರು ಗ್ರಾಮದಲ್ಲಿ ಬಸ್ ಶೆಲ್ಟರ್, ಎನ್.ಎನ್ ಕ್ಯಾಂಪಿನ ಸರಕಾರಿ ಶಾಲೆಯಲ್ಲಿ ಭೋಜನಾಲಯ, ಅಂತರಗಂಗಿ ತಾಂಡಾ, ಚಿಕ್ಕದಿನ್ನಿ, ಗೋನವಾರ ಗ್ರಾಮದ ಶಾಲಾ ಕಟ್ಟಡಗಳನ್ನು ಬುಧವಾರ ಉದ್ಘಾಟನೆ ನೇರವೆರಿಸಿ ನಂತರ ಮಾತನಾಡಿದ ಅವರು ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ಮೂಲಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಹಲವಾರು ಸಾರ್ವಜನಿಕ ಸೌಲಭ್ಯಗಳನ್ನು ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುತ್ತದೆ ಎಂದರು.
ನಾನು ಶಾಸಕನಾದ ನಂತರ ಕ್ಷೇತ್ರದ ಹಲವಾರು ಗ್ರಾಮೀಣ ಭಾಗಕ್ಕೆ ಸಾರಿಗೆ ಇಲಾಖೆ ಬಸ್ಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಸಾರಿಗೆ ಬಸ್ ಓಡಾಡುತ್ತಿರುವದರಿಂದ ಜನ ಸಾಮಾನ್ಯರಿಗೆ ಅನುಕೂಲವಾಗಿದೆ. ಅದೇ ರೀತಿಯಾಗಿ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕಾಗಿ ವಸತಿ ಶಾಲೆಗಳನ್ನು ನಿರ್ಮಿಸಲು ಸರ್ಕಾರದ ಮೇಲೆ ಮತ್ತು ಶಿಕ್ಷಣ ಸಚಿವರಿಗೆ ಒತ್ತಡ ಹಾಕಿ ಹೊಸ ವಸತಿ ಶಾಲೆಗಳನ್ನು ಮಂಜೂರು ಮಾಡಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕ ಪದಾಧಿಕಾರಿಗಳು, ಗ್ಯಾರಂಟಿ ಯೋಜನೆ ಪದಾಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರಿದ್ದರು.

