ರಾಯಚೂರು ಫೆಬ್ರವರಿ 02 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.2ರಂದು ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ಮುಕ್ತಿ ರಥ ವಾಹನ ಗಮನ ಸೆಳೆಯಿತು.
ನಾವೆಲ್ಲರೂ ಒಟ್ಟಾಗಿ ಬಾಲ್ಯ ವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡೋಣ. ಎಲ್ಲಾ ಮಕ್ಕಳು ತಮ್ಮ ಹಕ್ಕುಗಳು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡೋಣ ಎನ್ನುವ ಸಂದೇಶ ಹೊತ್ತ ಜಾಗೃತಿ ವಾಹನವು ಜಿಲ್ಲಾ ಕ್ರೀಡಾಂಗಣದ ವಿವಿಧೆಡೆ ಸಂಚರಿಸಿತು.
ದೊಡ್ಡ ಸಂಖ್ಯೆಯಲ್ಲಿ ಮಕ್ಕಳು ಸೇರಿರುವ ಕಾರ್ಯಕ್ರಮದಲ್ಲಿ ಸಂಚಾರಿ ಜಾಗೃತಿ ರಥ ವಾಹನದ ಮೂಲಕ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು. ಮಕ್ಕಳಿಗೆ ಸುರಕ್ಷಿತ ಸ್ಪರ್ಶ, ಅಸುರಕ್ಷಿತ ಸ್ಪರ್ಶ, ಮಕ್ಕಳ ಸಹಾಯವಾಣಿ ಸಂಖ್ಯೆ: 1098 ಹಾಗೂ ಪೋಕ್ಸೋ ಕಾಯ್ದೆ ಕುರಿತು ಕರಪತ್ರ ಹಂಚುವ ಮೂಲಕ ಹಾಗೂ ವೇದಿಕೆಯ ಮುಂಭಾಗದಲ್ಲಿ ಸೆಲ್ಫಿ ಸ್ಟ್ಯಾಂಡ್ ಇಟ್ಟು ಜಾಗೃತಿ ಮೂಡಿಸಲಾಯಿತು.
ಬಾಲ್ಯ ವಿವಾಹ ನಿಷೇಧ ಕುರಿತು ಆಡಿಯೋ ಜಿಂಗಲ್ಸ್ ಮೂಲಕವೂ ಜಾಗೃತಿ ಮೂಡಿಸಲಾಯಿತು.
ಈ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹಾಪಾತ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅಮರೇಶ್ ಹಾವಿನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶರಣಮ್ಮ, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷ ಈರಮ್ಮ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.


