ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಿಸಿ, ರಾಜ್ಯದಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಹಾಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಹೇಳಿದರು.
ಫೆ.12ರ ಗುರುವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫಲಿತಾಂಶದ ಪ್ರಮಾಣ ಹೆಚ್ಚಿಸುವಲ್ಲಿ ಶಿಕ್ಷಕರ ಶ್ರಮ ಬಹಳ ಪ್ರಮುಖವಾಗಿರುತ್ತದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ವಿಶೇಷ ಗಮನಹರಿಸಿದಾಗ ಸಹಜವಾಗಿ ಉತ್ತಮ ಫಲಿತಾಂಶ ದೊರೆಯುತ್ತದೆ. ಮಕ್ಕಳ ಶೈಕ್ಷಣಿಕ, ಕೌಟುಂಬಿಕ ವಾತಾವರಣ ಸರಿಯಾಗಿಲ್ಲ ಎನ್ನುವಂತಹ ಬಾಲಿಶ ಕಾರಣಗಳನ್ನು ಹೇಳದೇ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಅವರು ತಿಳಿಸಿದರು.
ಪೂರ್ವಸಿದ್ಧತಾ ಪರೀಕ್ಷೆಗಳ ಫಲಿತಾಂಶದ ಆಧಾರದ ಮೇಲೆ, ಕಡಿಮೆಅಂಕ ಗಳಿಸಿದ ವಿದ್ಯಾರ್ಥಿಗಳ ಕಡೆಗೆ ಶಿಕ್ಷಕರು ವಿಶೇಷ ಗಮನ ಹರಿಸಬೇಕು. ಶೇ.40ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳ ಮೇಲೆ ಹೆಚ್ಚಿನ ನಿಗಾ ವಹಿಸಿ, ಅಲ್ಲಿನ ಬೋಧನಾ ಕ್ರಮಗಳಲ್ಲಿ ಸುಧಾರಣೆ ತರಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸನ್ನದ್ಧಗೊಳಿಸಲು ಪೂರಕ ಬೋಧನೆ ಮತ್ತು ಪುನರಾವರ್ತನೆಗೆ ಆದ್ಯತೆ ನೀಡಬೇಕು. ಅಲ್ಲದೆ ಹಿಂದುಳಿದ ವಿದ್ಯಾರ್ಥಿಗಳನ್ನು ಶಿಕ್ಷಕರು ದತ್ತು ಪಡೆದು ವೈಯಕ್ತಿಕ ಮಾರ್ಗದರ್ಶನ ನೀಡುವ ಜೊತೆಗೆ ಪರೀಕ್ಷಾ ದೃಷ್ಟಿಯಿಂದ ಪ್ರಮುಖವಾಗಿರುವ ವಿಷಯಗಳ ಬಗ್ಗೆ ಹೆಚ್ಚಿನ ತರಬೇತಿ ನೀಡಬೇಕೆಂದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಆರ್.ಪಿ, ಬಿಆರ್ ಪಿ ಸೇರಿದಂತೆ ವಿವಿಧ ಶಾಲೆಯ ಮುಖ್ಯಗುರುಗಳು ಇದ್ದರು.

Leave a Reply

Your email address will not be published. Required fields are marked *