ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಹಾಗೂ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸು ಸಾರಲು ಫೆ. 20ರಂದು ನಗರದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಕಾರ್ಯಾಗಾರ-ಉತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಪಂ ಸಿಇಒ ಶಶಿಧರ ಕುರೇರ ಸಂಬಂಧಿಸಿದ ಅಧಿಕಾರಿಗಳಿಗೆ ಜಂಟಿ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಮಂಗಳವಾರ ಜರುಗಿದ ಪಂಚ ಗ್ಯಾರಂಟಿ ಯೋಜನೆಯ ಕಾರ್ಯಾಗಾರ-ಉತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಫೆ. 20ರಂದು ನವನಗರದ ಜಿಲ್ಲಾ ಕಲಾಭವನದಲ್ಲಿ ಗ್ಯಾರಂಟಿ ಯೋಜನೆಗಳ ಉತ್ಸವ ನಡೆಯಲಿದ್ದು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ದೃಷ್ಟಿಯಿಂದ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗೆ ವಹಿಸಿಕೊಟ್ಟ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ತಿಳಿಸಿದರು.
ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಸಾರಲು ಹಾಗೂ ಅರ್ಹ ಲಾನುಭವಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಉದ್ಘಾಟಿಸಲಿದ್ದು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆಂದು ಹೇಳಿದರು. 3 ಸಾವಿರಕ್ಕೂ ಹೆಚ್ಚು ಯೋಜನೆಗಳ ಲಾನುಭವಿಗಳು ಆಗಮಿಸುತ್ತಿದ್ದು, ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್‌ಗಳ ವ್ಯವಸ್ಥೆ ಮಾಡುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಜಿಲ್ಲಾ ಸಂಚಾರಿ ಅಧಿಕಾರಿಗಳಿಗೆ ತಿಳಿಸಿದರು.
ಕಲಾಭವನದ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಮಾಹಿತಿ ಸೇರಿ ವಿವಿಧ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಹಾಕುವ ವ್ಯವಸ್ಥೆ ಆಗಬೇಕು ಎಂದರು.
ಜಿಲ್ಲೆಯ ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಂಡ ಲಾನುಭವಿಗಳನ್ನು ಪಟ್ಟಿ ನೀಡಿದಲ್ಲಿ ಅವರಿಗೆ ಅನಿಸಿಕೆಗಳನ್ನು ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅನೀಲಕುಮಾರ ದಡ್ಡಿ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕು ಮಟ್ಟದ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಲಾನುಭವಿಗಳ ಕರೆತರುವ ಕೆಲಸ ಮಾಡಬೇಕು. ಉತ್ಸವದಲ್ಲಿ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಕ್ರಮಕೈಗೊಳ್ಳಲು ಸಭೆಗೆ ತಿಳಿಸಿದರು.
ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಜಯಶ್ರೀ ತಿಮ್ಮಾಪೂರ, ರಫೀಕ್ ಇಸ್ಮಾಯಿಲ್‌ಸಾಬ್ ಬೈರಕದಾರ್, ಶಿವಪ್ಪ ಕೋನೇರಿ, ರವೀಂದ್ರ ಯಡಹಳ್ಳಿ, ಜಿಪಂ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಸೇರಿದಂತೆ ತಾಲೂಕಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಯೋಜನೆ ಅನುಷ್ಠಾನ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *