ರಾಯಚೂರು ಫೆ.19 (ಕ.ವಾ.): ಸಫಾಯಿ ಕರ್ಮಚಾರಿಗಳ ಹಾಗೂ ಪೌರ ಕಾರ್ಮಿಕರ ಸಮಸ್ಯೆಗಳು ಮತ್ತು ಅವರ ಕುಂದು ಕೊರತೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ಮತ್ತು ಪರಿಹರಿಸುವ ಉದ್ದೇಶವನ್ನು ಸಫಾಯಿ ಕರ್ಮಚಾರಿಗಳ ಆಯೋಗವು ಹೊಂದಿದೆ. ಪೌರಕಾರ್ಮಿಕರು ತಾವು ಸಮಾಜದಲ್ಲಿ ಎಲ್ಲರಂತೆ ಇರಬೇಕು ಎಂಬ ಭಾವನೆಯನ್ನು ಇಟ್ಟುಕೊಂಡು ಮಕ್ಕಳನ್ನೂ ಶಿಕ್ಷಣವಂತರನ್ನಾಗಿ ಮಾಡಲು ಶ್ರಮಿಸಬೇಕೆಂದು ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಫೆ.19ರಂದು ಹಮ್ಮಿಕೊಂಡಿದ್ದ ಪೌರಕಾರ್ಮಿಕರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೌರಕಾಮಿಕರು ತಾವು ಸಮಾಜದಿಂದ ದೂರು ಇದ್ದೇವೆ ಎಂಬ ಭಾವನೆಯನ್ನು ಬಿಡಬೇಕು. ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕ. ಸರಿಯಾಗಿ ನೋಡಿಕೊಳ್ಳಲು ಮುಂದಾಗಬೇಕು ಎಂದರು.
ಇದೇ ವೇಳೆ ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಸ್.ಮಾರೆಪ್ಪ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿದ್ದ, ಮೃತ ಹೊಂದಿದ ಪೌರಕಾರ್ಮಿಕರ ಮಾಹಿತಿಯನ್ನು ತಪ್ಪಾಗಿ ದಾಖಲಿಸಲಾಗಿದ್ದು, ಇದನ್ನು ಮರುಪರಿಶೀಲಿಸಬೇಕು. ಮತ್ತು ಮೃತ ಪೌರಕಾರ್ಮಿಕರ ಕುಟುಂಬಕ್ಕೆ ಪರಿಹಾರ ಮತ್ತು ಸೌಲಭ್ಯಗಳನ್ನು ಒದಗಿಸಬೇಕೆಂದು ತಿಳಿಸಿದರು.
ದಲಿತ ಸಮರ ಸೇನೆಯ ರಾಜ್ಯ ವಿಭಾಗೀಯ ಸಂಚಾಲಕ ನೀಲಕಂಠ(ಅನಿಲ್) ಮಾತನಾಡಿ, ಸಪಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯಗಳು ಮತ್ತು ಕಡ್ಡಾಯವಾಗಿ ಆಯಾ ಸ್ಥಳೀಯ ಸಂಸ್ಥೆಗಳಿಂದ ಗುರುತಿನ ಚೀಟಿಯನ್ನು ಒದಗಿಸಬೇಕು. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಸಲಹೆ ಮಾಡಿದರು.
ಇತರೆ ಪೌರಕಾರ್ಮಿಕರು ಮಾತನಾಡಿ, ವಾರಕ್ಕೊಂದು ದಿನ ಸಂಪೂರ್ಣ ರಜೆಯನ್ನು ನೀಡಬೇಕು. ರಾಯಚೂರು ನಗರದಿಂದ ಬೇರೆ ತಾಲೂಕುಗಳ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರು ವಾರಕ್ಕೊಂದು ದಿನ ರಜೆ ಸಿಕ್ಕರೆ ಮನೆಗೆ ಹೋಗಿ ಬರಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆಯೋಗದ ಕಾರ್ಯದರ್ಶಿ ಮಾದುಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ನಗರಸಭೆ ಪರಾಯುಕ್ತ ಈರಣ್ಣ ಬಿರಾದಾರ, ಪಾಲಿಕೆ ಉಪ ಆಯುಕ್ತರಾದ ಸಂತೋಷಿರಾಣಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸಿಂಧೂ, ಪಾಲಿಕೆಯ ಅಧಿಕಾರಿ ಕೃಷ್ಣ ಶಾವಂತಗೇರಾ ಸೇರಿದಂತೆ ಅನೇಕರಿದ್ದರು.


