ಕೊಪ್ಪಳ : ವಾರಾಂತ್ಯದ ರಜೆಯ ದಿನವಾದ ಭಾನುವಾರ ನಗರದಲ್ಲಿ ಬೆಳ್ಳಂಬೆಳಿಗ್ಗೆ ಓಟದ ಖುಷಿ ಮನೆ ಮಾಡಿತ್ತು. ಜಿಲ್ಲಾ ಪೊಲೀಸ್‌ ವತಿಯಿಂದ ಆಯೋಜಿಸಲಾಗಿದ್ದ ಓಟದ ಸ್ಪರ್ಧೆಯಲ್ಲಿ ನೂರಾರು ಜನ ಪಾಲ್ಗೊಂಡು ಸಂಭ್ರಮ ಅನುಭವಿಸಿದರು. ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಎಲ್ಲರಿಗೂ ಫಿಟ್‌ನೆಸ್‌ ಹಾಗೂ ನಶೆಮುಕ್ತ ಕರ್ನಾಟಕದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಓಟದ ಸ್ಪರ್ಧೆಯಲ್ಲಿ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾಸ್ಟೆಲ್‌ ಮಕ್ಕಳು, ಐಆರ್‌ಬಿ ತಂಡದವರು, ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರು ಹೀಗೆ ಅನೇಕರು ಭಾಗವಹಿಸಿದ್ದರು.ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಓಟ ಗವಿಮಠ ತನಕ ನಡೆಯಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್‌ ಎಲ್‌. ಅರಸಿದ್ಧಿ ಮಾತನಾಡಿ ‘ಜನರೊಂದಿಗೆ ನಾವಿದ್ದೇವೆ ಎನ್ನುವ ಸಂದೇಶ ನೀಡುವ ಸಲುವಾಗಿ ಓಟ ಹಮ್ಮಿಕೊಂಡಿದ್ದೇವೆ. ಇದು ವಾರ್ಷಿಕ ಕ್ರೀಡಾಕೂಟದ ಭಾಗವೇ ಆಗಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಎ.ವಿ.ಕಣವಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *